ಮುಂಬಡ್ತಿ ಪಡೆದ ಪೊಲೀಸ್ ಇಲಾಖೆ ಸಿಬ್ಬಂದಿಗೆ ಸನ್ಮಾನ: ಜವಾಬ್ದಾರಿ ಅರಿತು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಿ -ಎಸ್ಪಿ ಸೈದುಲು ಅಡಾವತ್

ಬಳ್ಳಾರಿ: ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳ ಪೈಕಿ ಸೇವಾ ಹಿರಿತನದ ಆಧಾರದ ಮೇರೆಗೆ ಹೆಡ್ ಕಾನ್ಸ್‌ಟೇಬಲ್, ಸಶಸ್ತ್ರ ಹೆಡ್ ಕಾನ್ಸ್‌ಟೇಬಲ್, ಪೊಲೀಸ್ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ಮುಂಬಡ್ತಿ ಪಡೆದವರನ್ನು ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಆವರಣದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಸನ್ಮಾನಿಸಿ, ಶುಭಹಾರೈಸಲಾಯಿತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್ ಅವರು ಈ ಸಂದರ್ಭದಲ್ಲಿ ಮುಂಬಡ್ತಿ ಪಡೆದವರನ್ನು ಸನ್ಮಾನಿಸಿದರು. ಹೂವು ನೀಡಿ, ಸಿಹಿ ಹಂಚಿ ಮುಂದಿನ ದಿನಗಳಲ್ಲಿ ತಮ್ಮ ಜವಾಬ್ದಾರಿ ಅರಿತು ಉತ್ತಮ ರೀತಿಯಲ್ಲಿ ಕರ್ತವ್ಯ ನಿರ್ವಹಿಸುವಂತೆ ಹಾಗೂ ಸಾರ್ವಜನಿಕ ಕುಂದು ಕೊರತೆಗಳಿಗೆ ಸ್ಪಂದಿಸುವಂತೆ ಸೂಚಿಸಿದರು.
ನಾಗರಿಕ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಯಿಂದ ನಾಗರೀಕ ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಹುದ್ದೆಗೆ 71ಜನರನ್ನು, ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಯಿಂದ ಸಶಸ್ತ್ರ ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಹುದ್ದೆಗೆ 5 ಹಾಗೂ ನಾಗರೀಕ ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಹುದ್ದೆಯಿಂದ ಪೊಲೀಸ್ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಹುದ್ದೆಗೆ 35 ಜನರಿಗೆ ಮುಂಬಡ್ತಿ ನೀಡಿ ಮುಂಬಡ್ತಿ ನೀಡಲಾಗಿದೆ.
ಈ ಸಂದರ್ಭದಲ್ಲಿ ಜಿಲ್ಲಾ ಅಪರ ಪೊಲೀಸ್ ವರಿಷ್ಠಾಧಿಕಾರಿ ಬಿ.ಎನ್.ಲಾವಣ್ಯ, ಡಿಎಆರ್ ಡಿವೈ.ಎಸ್ಪಿ ಹೆಚ್ ಎಮ್ ಎಸ್ ಸರ್ದಾರ್, ಡಿ.ಸಿ.ಆರ್.ಬಿ ಡಿವೈಎಸ್ಪಿ ಮಹೇಶಗೌಡ, ನಗರ ಡಿವೈಎಸ್ಪಿ ಹಾಗೂ ಬಳ್ಳಾರಿ ವಲಯದ ಐಜಿಪಿ ಕಚೇರಿಯ ಸಹಾಯಕ ಆಡಳಿತಾಧಿಕಾರಿ ಕೆ. ಮಾರುತಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *