ಕುಡುತಿನಿ ಬಿಟಿಪಿಎಸ್‍ಗೆ ಭೇಟಿ:  ನವೀಕರಿಸಬಹುದಾದ ಇಂಧನ ಉತ್ಪಾದನೆಗೆ ಒತ್ತು -ಇಂಧನ‌ ಸಚಿವ ಕೆ.ಜೆ.ಜಾರ್ಜ್

ಬಳ್ಳಾರಿ,ಜೂ.26: ರಾಜ್ಯದಲ್ಲಿ ನವೀಕರಿಸಬಹುದಾದ ಇಂಧನ ಉತ್ಪಾದನೆಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಹೇಳಿದರು.
ಜಿಲ್ಲೆಯ ಕುಡತಿನಿ ಬಳಿಯಿರುವ “ಬಳ್ಳಾರಿ ಶಾಖೋತ್ಪನ್ನ ವಿದ್ಯುತ್ ಕೇಂದ್ರ”ಕ್ಕೆ ಸೋಮವಾರ ಭೇಟಿ ನೀಡಿ ಅವರು ಮಾತನಾಡಿದರು.
ರಾಜ್ಯದಲ್ಲಿ ಮುಂಗಾರು ವಿಳಂಬದಿಂದಾಗಿ ವಿದ್ಯುತ್ ಉತ್ಪಾದನೆಗೆ ಸಮಸ್ಯೆಯಾಗಿಲ್ಲ. ಮುಂದಿನ ದಿನಗಳಲ್ಲಿ ಮಳೆಯಾಗುವ ಆಶಾಭಾವನೆ ಇದೆ ಎಂದರು.
ರಾಜ್ಯದಲ್ಲಿ ಇಲೆಕ್ಟ್ರಾನಿಕ್ ವಾಹನಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ಚಾರ್ಜಿಂಗ್ ಸ್ಟೇಷನ್‍ಗಳನ್ನು ಹೆಚ್ಚಿಸಲು ಉದ್ದೇಶಿಸಲಾಗಿದೆ ಎಂದು ಹೇಳಿದರು.
ಇನ್ನು ಇರುವ ಶಾಖೋತ್ಪನ್ನಗಳನ್ನು ಬಲಪಡಿಸಲಾಗುವುದು. ಯಾವುದೇ ರೀತಿ ಶಾಖೋತ್ಪನ್ನ ಕೇಂದ್ರಗಳನ್ನು ಹೆಚ್ಚಿಸುವುದಿಲ್ಲ. ಸೌರ ವಿದ್ಯುತ್‍ಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಕಲ್ಲಿದ್ದಲಿನ ಕೊರತೆ ಇಲ್ಲ. ಕಲ್ಲಿದ್ದಲಿನ ಗುಣಮಟ್ಟ ಕಾಯ್ದುಕೊಳ್ಳಲು ತಿಳಿಸಲಾಗಿದೆ ಎಂದರು.
ರಾಜ್ಯ ಸರ್ಕಾರದ ಗ್ಯಾರಂಟಿ ಸ್ಕೀಂ ಬಗ್ಗೆ ಮಾತನಾಡಿದ ಅವರು, ಗೃಹ ಜ್ಯೋತಿ ಯೋಜನೆಯನ್ನು ಜುಲೈಯಿಂದಲೇ ಅನುಷ್ಠಾನಗೊಳಿಸಲಾಗುವುದು. 200 ಯೂನಿಟ್‍ಗಿಂತ ಕಡಿಮೆ ವಿದ್ಯುತ್ ಬಳಕೆ ಮಾಡುವವರಿಗೆ ಆಗಸ್ಟ್ ತಿಂಗಳಿಂದ ಜನರಿಗೆ ‘ಶೂನ್ಯ’ ಬಿಲ್ ನೀಡಲಾಗುತ್ತದೆ. ಅದಕ್ಕಿಂತ ಹೆಚ್ಚಿನ ಯೂನಿಟ್ ಬಳಸಿದಲ್ಲಿ ಬಳಕೆ ಮಾಡಿದ ವಿದ್ಯುತ್ ಬಿಲ್ ಪಾವತಿಸಬೇಕಾಗುತ್ತದೆ ಎಂದು ತಿಳಿಸಿದರು.
ರಾಜ್ಯದಲ್ಲಿ 2.16 ಕೋಟಿ ಜನರು ಗೃಹಜ್ಯೋತಿ ಫಲಾನುಭವಿಗಳಿದ್ದು, ಅದರಲ್ಲಿ 2.14 ಕೋಟಿ ಜನರು ಅರ್ಹರಿದ್ದಾರೆ. ನಾವು ನೀಡಿದ ಆಶ್ವಾಸನೆಯಂತೆ ಜನರಿಗೆ ಉಚಿತ ವಿದ್ಯುತ್ ನೀಡಲಾಗುವುದು ಎಂದರು.
ಇನ್ನು ವಿದ್ಯುತ್ ದರ ಏರಿಕೆ ವಿಚಾರ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಸೆಪ್ಟೆಂಬರ್‍ನಲ್ಲೇ ವಿದ್ಯುತ್ ದರ ಏರಿಕೆ ಬಗ್ಗೆ ಪ್ರಸ್ತಾವನೆ ಸಲ್ಲಿಸಿದ್ದು, ಮೇ 12 ರಿಂದ ವಿದ್ಯುತ್ ದರ ಹೆಚ್ಚಿಸಲಾಗಿದೆ.  ಆದ್ದರಿಂದ ವಿದ್ಯುತ್ ದರ ಹೆಚ್ಚಳಕ್ಕೂ ಗೃಹಜ್ಯೋತಿ ಯೋಜನೆಗೂ ಸಂಬಂಧ ಇಲ್ಲ ಎಂದು ಸ್ವಷ್ಟಪಡಿಸಿದರು.
ಈ ಸಂದರ್ಭದಲ್ಲಿ ಬಿಟಿಪಿಎಸ್ ಹಿರಿಯ ಅಧಿಕಾರಿಗಳು  ಇದ್ದರು.
——

Leave a Reply

Your email address will not be published. Required fields are marked *