ಕೋಮು ಗಲಭೆ ಮಾಡುವವರ ವಿರುದ್ಧ ಕಠಿಣ ಕ್ರಮ -ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ, ಅ. 3: ನಮ್ಮ ಸರ್ಕಾರ ಕೋಮು ಗಲಭೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಂಡು, ಸಮಾಜದಲ್ಲಿ ಕೋಮು ಸೌಹಾರ್ದತೆಗೆ ಭಂಗ ತರುವ ಪ್ರಕರಣಗಳನ್ನು ನಿಯಂತ್ರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.                                  ಅವರು ಮಂಗಳವಾರ ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾನಾಡಿದರು.          ‌‌‌‌‌   ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದ ಮೇಲೆ ಕೋಮು ಗಲಭೆ ಹೆಚ್ಚಾಗಿದೆ ಎಂದು ಬಿಜೆಪಿಯವರು ಆರೋಪ ಮಾಡುತ್ತಿರುವುದಕ್ಕೆ ಪ್ರತಿಕ್ರಿಯೆ ನೀಡಿ, ಬಿಜೆಪಿಯವರಿಗೆ ಆರೋಪ ಮಾಡುವುದೇ ಕೆಲಸವಾಗಿದೆ. ಆರೋಪ ಮಾಡುವುದೆಲ್ಲ ಸತ್ಯವಲ್ಲ.ಶಿವಮೊಗ್ಗದ ಪ್ರಕರಣದಲ್ಲಿ ಕಲ್ಲು ಹೊಡೆದ ದುಷ್ಕರ್ಮಿಗಳನ್ನು ಬಂಧಿಸಲಾಗಿದ್ದು, ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ಪ್ರತಿಭಟನೆಗೆ ಸಕಾರಣವಿರಬೇಕು: ಕೋಲಾರದಲ್ಲಿ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಉತ್ತರಿಸಿ, ಯಾರು ಬೇಕಾದರೂ ಪ್ರತಿಭಟನೆ ಮಾಡಬಹುದು. ಆದರೆ ಆ ಪ್ರತಿಭಟನೆಗೆ ಸಕಾರಣವಿರಬೇಕು ಮತ್ತು ಶಾಂತಿಯುತವಾಗಿ ನಡೆಯಬೇಕು ಎಂದರು.

ಸರ್ಕಾರದಲ್ಲಿ ಯಾರಿಗೂ ಅನ್ಯಾಯವಾಗಿಲ್ಲ: ಕುರುಬ ಸಮಾಜ ಸಮಾವೇಶದ ಸಂದರ್ಭದಲ್ಲಿ ಲಿಂಗಾಯತ ಸಮುದಾಯಕ್ಕೆ ಅನ್ಯಾಯವಾಗುತ್ತಿದೆ ಎಂಬ ಕೂಗು ಎದ್ದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ನಮ್ಮ ಸರ್ಕಾರದಲ್ಲಿ ಯಾರಿಗೂ ಅನ್ಯಾಯವಾಗಿಲ್ಲ. ಎಲ್ಲರನ್ನೂ ಒಳಗೊಂಡಂತಹ ಆಡಳಿತದ ನೀತಿ ನಮ್ಮ ಸರ್ಕಾರ ಹೊಂದಿದೆ ಎಂದರು.                                            ಬೇರೆ ಬೇರೆ ಠಾಣೆಗಳಲ್ಲಿ ದಾಖಲಾಗಿರುವ ಪ್ರಕರಣಗಳನ್ನು ಹಿಂಪಡೆಯುವ ಬಗ್ಗೆ ಉಪ ಮುಖ್ಯಮಂತ್ರಿಗಳು ಮುಖ್ಯಮಂತ್ರಿಗಳಿಗೆ ಬರೆದಿರುವ ಪತ್ರದ ಕುರಿತು ಪತ್ರಕರ್ತರು ಕೇಳಿದ ಪ್ರಶ್ನೆಗೆ, ಒಕ್ಕಲಿಗರ ಹೋರಾಟ ಸಮಿತಿ ನೀಡಿದ ಪತ್ರವನ್ನು ಆಧರಿಸಿ, ಉಪ ಮುಖ್ಯಮಂತ್ರಿಗಳು ನನಗೆ ಪತ್ರ ಬರೆದಿದ್ದಾರೆ. ಇಂದಷ್ಟೇ ಆ ಪತ್ರ ನೋಡಿದ್ದೇನೆ ಎಂದು ತಿಳಿಸಿದರು.                                            ತಮ್ಮ ಅವಧಿಯಲ್ಲಿ ಬೆಳಗಾವಿ ಜಿಲ್ಲೆಯ ವಿಭಜನೆ ಆಗಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಈ ಬಗ್ಗೆ ಶಾಸಕರ ಜೊತೆ ಚರ್ಚಿಸಲಾಗುವುದು ಎಂದು ಹೇಳಿದರು.

Leave a Reply

Your email address will not be published. Required fields are marked *