ಚಾಮರಾಜನಗರ, ಜೂ.18: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ವತಿಯಿಂದ ಮಲೆ ಮಹದೇಶ್ವರ ಬೆಟ್ಟದಲ್ಲಿ ಇದೇ 21ರಂದು ನಡೆಯುವ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಪೂರ್ವ ಭಾವಿ ಸಭೆ ಹನೂರು ತಾಲೂಕಿನ ಪ್ರವಾಸಿ ಮಂದಿರದಲ್ಲಿ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರ ಅಧ್ಯಕ್ಷತೆಯಲ್ಲಿ ನಡೆದು, ಕಾರ್ಯಕ್ರಮದ ಸಿದ್ದತೆ ಕುರಿತು ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ರಾಜ್ಯ ಸಂಘದ ಖಜಾಂಚಿ ಎಂ.ವಾಸುದೇವ ಹೊಳ್ಳ, ಚಾಮರಾಜನಗರದ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ದೇವರಾಜು ಕಪ್ಪಸೋಗೆ, ರಾಜ್ಯ ಸಮಿತಿ ಸದಸ್ಯ ಎಸ್.ಎಂ ನಂದೀಶ್, ಹನೂರು ತಾಲೂಕು ಸಂಘದ ಅಧ್ಯಕ್ಷ ಮಹಾದೇಶ್ ಎಂ, ಪ್ರಧಾನ ಕಾರ್ಯದರ್ಶಿ ಎಸ್.ಪ್ರಸಾದ್ ಲಕ್ಕೂರು ಮತ್ತು ಎಲ್ಲಾ ಪದಾಧಿಕಾರಿಗಳು ಹಾಜರಿದ್ದರು.
ನಂತರ ಮಾದಪ್ಪನ ಸನ್ನಿಧಿ ಮಲೆಮಹದೇಶ್ವರ ಬೆಟ್ಟದಲ್ಲಿ ನಡೆಯಲಿರುವ ಕೆಯುಡಬ್ಲ್ಯೂಜೆ ರಾಜ್ಯ ಕಾರ್ಯಕಾರಿ ಸಮಿತಿ ಸಭೆ ಹಾಗೂ ಪ್ರತಿಭಾಪುರಸ್ಕಾರ ಕಾರ್ಯಕ್ರಮ ಸ್ಥಳ ಪರಿಶೀಲನೆ , ಪೆಂಡಾಲ್ ವ್ಯವಸ್ಥೆ ಮತ್ತು ವಸತಿ ವ್ಯವಸ್ಥೆ ವೀಕ್ಷಿಸಿದ ಅಧ್ಯಕ್ಷ ತಗಡೂರು ಅವರು ಕೆಲ ಸೂಕ್ತ ಸಲಹೆಗಳನ್ನು ನೀಡಿದರು.
ಅಲ್ಲದೆ, ಈ ಕುರಿತು ಅಲ್ಲಿನ ಕ್ಷೇತ್ರಾಭಿವೃದ್ದಿ ಪ್ರಾಧಿಕಾರ ಕಾರ್ಯದರ್ಶಿ ಎ.ಇ.ರಘುವರೊಂದಿಗೆ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಸಮಾಲೋಚನೆ ನಡೆಸಲಾಯಿತು.
ಈ ಸಂದರ್ಭದಲ್ಲೂ ಹನೂರು ತಾಲ್ಲೂಕು ಸಂಘದ ಅಧ್ಯಕ್ಷರು ಸೇರಿದಂತೆ ಎಲ್ಲಾ ಪದಾಧಿಕಾರಿಗಳು, ಪತ್ರಕರ್ತರು ಹಾಜರಿದ್ದರು.
ಕೊನೆಯಲ್ಲಿ ಮಾತನಾಡಿದ ರಾಜ್ಯಾಧ್ಯಕ್ಷರು ಪಶ್ಚಿಮಘಟ್ಟದಲ್ಲಿ ಪ್ರಕೃತಿಯನ್ನು ಮೈತುಂಬಿಕೊಂಡ ಅಹ್ಲಾದಕರ ವಾತಾವರಣ ಮಲೆ ಮಹದೇಶ್ಚರ ಬೆಟ್ಟದಲ್ಲಿದೆ.
ಇಲ್ಲಿ ನಡೆಯಲಿರುವ ರಾಜ್ಯ ಕಾರ್ಯಕಾರಿಣಿ ಸಭೆ ಹಾಗೂ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಕ್ಕೆ ರಾಜ್ಯದ ಎಲ್ಲಾ ಜಿಲ್ಲೆ, ತಾಲ್ಲೂಕಿನಿಂದ ಪತ್ರಕರ್ತರು ಮತ್ತು ಪ್ರತಿಭಾನ್ವಿತ ಮಕ್ಕಳೆಲ್ಲರೂ ಭಾಗವಹಿಸಬೇಕೆಂದು ಅವರು ವಿನಂತಿಸಿದರು.
——