ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು, ಜ. 13:ಲೋಕಸಭೆಯ ಪ್ರತಿ ಪಕ್ಷದ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.                                                    ಅವರು ಮಂಗಳವಾರ ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ರಾಹುಲ್ ಗಾಂಧಿಯವರು ಗೂಡ್ಲೂರಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದು ಮಾರ್ಗ ಮಧ್ಯೆ ಭೇಟಿ ಮಾಡಲಾಗಿದೆ. ಸಂಜೆ ದೆಹಲಿಗೆ ತೆರಳುವಾಗಲೂ ಬೀಳ್ಕೊಡಲಾಗುವುದು ಎಂದರು.

ಅಧಿಕಾರ ಹಂಚಿಕೆಯ ಗೊಂದಲವಿಲ್ಲ: ಪಕ್ಷದಲ್ಲಿ ಅಧಿಕಾರ ಹಂಚಿಕೆಯ ಬಗ್ಗೆ ಗೊಂದಲಗಳಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ. ಇದೆಲ್ಲ ಮಾಧ್ಯಮಗಳ ಸೃಷ್ಟಿ ಎಂದರು.

ಪಕ್ಷದ ಶಾಸಕರೇ ಈ ಬಗ್ಗೆ ಮಾತನಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಶಾಸಕರಿಗೆ ಈ ಕುರಿತು ತಿಳಿದಿರುವುದಿಲ್ಲ. ನಾನು ಅಥವಾ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮಾತನಾಡಬೇಕು ಎಂದರು.

ಪಕ್ಷದ ವರಿಷ್ಠರ ತೀರ್ಮಾನವೇ ಅಂತಿಮ: ಅಧಿಕಾರ ಹಂಚಿಕೆ ವಿಚಾರದಲ್ಲಿ ಅಂತಿಮವಾಗಿ ಪಕ್ಷದ ವರಿಷ್ಠರ ತೀರ್ಮಾನದಂತೆ ನಡೆದುಕೊಳ್ಳಲಾಗುವುದು ಎಂದರು. ಶಾಸಕರಿಗಿಂತ ಹೆಚ್ಚಾಗಿ ಮಾಧ್ಯಮಗಳೇ ಈ ಕುರಿತು ಹೆಚ್ಚು ಮಾತನಾಡುತ್ತಿವೆ ಎಂದು ಮುಖ್ಯಮಂತ್ರಿಗಳು ಹೇಳಿದರು.


  1. ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸರ್ಕಾರ ಸಿದ್ಧ: ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಬಿಜೆಪಿ ಜೆಡಿಎಸ್ ನಿಂದ ಪಾಲಿಕೆ ಚುನಾವಣೆಗಳಲ್ಲಿ ಯಾವುದೇ ಪರಿಣಾಮ ಉಂಟಾಗುವುದಿಲ್ಲ ಎಂದು ಮುಖ್ಯಮಂತ್ರಿಗಳು ವಿಶ್ವಾಸ ವ್ಯಕ್ತಪಡಿಸಿದರು.

ಬಜೆಟ್: ಬಹುತೇಕ ಮಾರ್ಚ್ ಮೊದಲ ವಾರದಲ್ಲಿ ಬಜೆಟ್ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ಮಾಧ್ಯಮಗಳ ಪ್ರಶ್ನಿಗೆ ಉತ್ತರಿಸಿದರು.

ಸಾಧನಾ ಸಮಾವೇಶ ನಡೆಸುವ ಬಗ್ಗೆ ಚಿಂತನೆ: ಮುಖ್ಯಮಂತ್ರಿಯಾಗಿ ಸಾವಿರ ದಿನಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಫೆ. 13ರಂದು ಹಾವೇರಿಯಲ್ಲಿ ಸಾಧನಾ ಸಮಾವೇಶವನ್ನು ಆಯೋಜಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿಗಳು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

ಎಚ್. ಡಿ.ಕುಮಾರಸ್ವಾಮಿ ವರ್ತನೆಯನ್ನು ಗಮನಿಸುವುದಿಲ್ಲ:
ಕೇಂದ್ರ ಸಚಿವ ಎಚ್. ಡಿ ಕುಮಾರಸ್ವಾಮಿ ಅವರು ರಾಜ ರಾಜಕಾರಣಕ್ಕೆ ಮರಳುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಈಗ ಆರೋಗ್ಯದಲ್ಲಿ ಚೇತರಿಕೆಯಾಗಿದ್ದು , ಕ್ರಿಯಾಶೀಲರಾಗಿದ್ದಾರೆ. ಅವರ ವರ್ತನೆ, ಹಾವಭಾವ ಇವುಗಳನ್ನು ಮಾಧ್ಯಮಗಳೇ ಗಮನಿಸಬೇಕು ನಾವು ಗಮನಿಸುವುದಿಲ್ಲ ಎಂದರು.

Leave a Reply

Your email address will not be published. Required fields are marked *