ಇನ್ಮುಂದೆ ಪ್ರತಿ ವರ್ಷ ನ. 3, 4, 5 ರಂದು ಹಂಪಿ ಉತ್ಸವ -ಮುಖ್ಯಮಂತ್ರಿ ಸಿದ್ದರಾಮಯ್ಯ

ಹಂಪಿ(ವಿಜಯನಗರ), ಫೆ. 13: ಪ್ರತಿ ವರ್ಷ ನ. 3, 4, 5 ರಂದು ಹಂಪಿ ಉತ್ಸವ ಆಯೋಜಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಶುಕ್ರವಾರ ಜನಪ್ರಿಯ ಹಂಪಿ ಉತ್ಸವ 2026 ನ್ನು ಉದ್ಘಾಟಿಸಿ ಮಾತನಾಡಿದರು.                       ರಾಜ್ಯ ಸರ್ಕಾರ ಈ ಬಾರಿಯೂ ಹಂಪಿ ಉತ್ಸವ ವನ್ನು ವಿಜೃಂಭಣೆಯಿಂದ ಆಚರಿಸುತ್ತಿದೆ. ಮಾಜಿ ಸಚಿವ ದಿ. ಎಂ ಪಿ ಪ್ರಕಾಶ್ ಅವರು ಹಿಂದೆ ಕನ್ನಡ ಮತ್ತು ಸಂಸ್ಕೃತಿಯ ಸಚಿವರಾಗಿದ್ದ ಸಂದರ್ಭದಲ್ಲಿ , ಮೈಸೂರು ದಸರಾ ಉತ್ಸವದ ವಿಜೃಂಭಣೆಯನ್ನು ಮನಗಂಡು, ಇದೇ ರೀತಿಯ ಉತ್ಸವವನ್ನು ಹಂಪಿಯಲ್ಲಿಯೂ ನೆರವೇರಿಸಬೇಕೆಂದು ಆಶಿಸಿದ್ದರು ಎಂದು ಹೇಳಿದರು.
ಎಂ ಪಿ ಪ್ರಕಾಶ್ ಅವರು, ಕನ್ನಡ ನಾಡು ನುಡಿ, ಸಾಹಿತ್ಯಗಳಲ್ಲಿ ಅಪಾರ ಆಸಕ್ತಿ ವಹಿಸಿದ್ದರು. ಈ ರೀತಿಯ ಅದ್ದೂರಿ ಹಂಪಿ ಉತ್ಸವದ ಆಚರಣೆಗೆ ಮೂಲಕಾರಣ ಎಂಪಿ ಪ್ರಕಾಶ್ ಅವರು. ಅವರೊಬ್ಬ ಅಪರೂಪದ ವ್ಯಕ್ತಿ ಎಂದರು.
ಕನ್ನಡ ನಾಡು ನುಡಿಗೆ ಸರ್ಕಾರದ ಪ್ರೋತ್ಸಾಹ: ಇತಿಹಾಸ ತಿಳಿಯದವರು ಇತಿಹಾಸ ಸೃಷ್ಟಿಸಲು ಸಾಧ್ಯವಿಲ್ಲ. ವಿಜಯನಗರ ಸಾಮ್ರಾಜ್ಯದ ಅವಧಿಯಲ್ಲಿ ಸಂಪತ್ಭರಿತವಾಗಿತ್ತು. ನಮ್ಮ ಸರ್ಕಾರ ಕೂಡ ಸಾಹಿತ್ಯ ಸಂಸ್ಕೃತಿ ಕಲೆ ಗಳಿಗೆ ಹೆಚ್ಚಿನ ಒತ್ತು ನೀಡುತ್ತದೆ. ವಿಜಯನಗರ ಕಾಲದಲ್ಲಿ ಸಂಪ್ಭರಿತವಾದ ಹಂಪಿಯ ಹಿರಿಮೆಯನ್ನು ಹಂಪಿ ಉತ್ಸವದಿಂದ ತಿಳಿಯಬಹುದಾಗಿದೆ ಎಂದು ತಿಳಿಸಿದರು.
ವಿದೇಶಿ ಪ್ರವಾಸಿಗ ಅಬ್ದುಲ್ ರಜಾಕ್ , ವಿಜಯನಗರ ಶ್ರೀಮಂತವಾದ ಸ್ಥಳವಾಗಿತ್ತು ಎಂದು ಉಲ್ಲೇಖಿಸಿದ್ದನ್ನು ಮುಖ್ಯಮಂತ್ರಿಗಳು ವಿವರಿಸಿದರು.

ಅಸಮಾನತೆ ನಿವಾರಣೆಯಿಂದ ಸಮಸಮಾಜ ನಿರ್ಮಿಸಲು ಸಾಧ್ಯ: ಸಮಾಜದಲ್ಲಿ ಬಡವ ಶ್ರೀಮಂತ, ಉತ್ತಮ ಮತ್ತು ಕೆಳ ಜಾತಿಗಳೆಂಬ ಬೇಧವಿದೆ. ಡಾ.ಬಿ.ಆರ್. ಅಂಬೇಡ್ಕರ್ ರವರು ಸಂವಿಧಾನ ರಚಿಸದಿದ್ದರೆ, ಸಮಾನ ಅವಕಾಶಗಳು ದೊರೆಯಲು ಸಾಧ್ಯವಾಗುತ್ತಿರಲಿಲ್ಲ. ಸಮಾಜದ ಅಸಮಾನತೆಯನ್ನು ತೊಡೆದುಹಾಕಿದರೆ ಸಮಸಮಾಜ ನಿರ್ಮಾಣ ಸಾಧ್ಯ. 2013 ರಲ್ಲಿ ಮತ್ತು 2023 ರಲ್ಲಿ ಮುಖ್ಯಮಂತ್ರಿಯಾಗಿ ನಾನು ತಂದಿರುವ ಕಾರ್ಯಕ್ರಮಗಳು ಅಸಮಾನತೆಯ ನಿವಾರಣೆಗೆ ತಂದವುಗಳಾಗಿವೆ. ಸಮಸಮಾಜ ನಿರ್ಮಿಸಿದಾಗ ಮಾತ್ರ ದುರ್ಬಲವರ್ಗದವರೂ ಮುಖ್ಯವಾಹಿನಿಗೆ ಬರಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯ ಪಟ್ಟರು.
ಗ್ಯಾರಂಟಿ ಯೋಜನೆಗಳಿಂದ ಜನರಿಗೆ ಆರ್ಥಿಕ ಶಕ್ತಿ: ನಮ್ಮ ಸರ್ಕಾರ ಅನೇಕ ಭಾಗ್ಯ ಯೋಜನೆಗಳನ್ನು ನೀಡಿದ್ದು, 2023 ರಿಂದಲೂ ಗ್ಯಾರಂಟಿ ಯೋಜನೆಗಳನ್ನು ನೀಡಿ, ಅಸಮಾನತೆಯನ್ನು ನಿವಾರಿಸುವ ಉದ್ದೇಶ ಹೊಂದಿದೆ. ಜನರಿಗೆ ಆರ್ಥಿಕ , ಸಾಮಾಜಿಕ ಶಕ್ತಿಯನ್ನು ಸಾಧ್ಯವಾಗಿಸದೇ ಇದ್ದರೆ, ಜಾತಿ ವ್ಯವಸ್ಥೇ ಹೋಗಲಾಡಿಸಬಹುದು. ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಪ್ರತಿ ಕುಟುಂಬಕ್ಕೆ ವಾರ್ಷಿಕವಾಗಿ ಸುಮಾರು 60 ಸಾವಿರ ರೂ.ಗಳ ಆರ್ಥಿಕ ಬಲವನ್ನು ತುಂಬುತ್ತಿದೆ. ಗ್ಯಾರಂಟಿ ಯೋಜನೆಗಳು ಜನರಿಗೆ ಕೊಂಡುಕೊಳ್ಳುವ ಶಕ್ತಿಯನ್ನು ಹೆಚ್ಚಿಸುತ್ತಿದೆ. ಜಾತಿವ್ಯವಸ್ಥೆ ಇಲ್ಲವಾಗಲು ಆರ್ಥಿಕ, ಸಾಮಾಜಿಕ, ರಾಜಕೀಯ, ಶೈಕ್ಷಣಿಕ ಸ್ವಾತಂತ್ರ್ಯ ಬರಬೇಕು ಎಂದರು.
ನಾಡು ನುಡಿ ಸಂಸ್ಕೃತಿಗಳ ರಕ್ಷಣೆಗೆ ಸರ್ಕಾರ ಬದ್ಧ: ಸರ್ಕಾರ ಆಚರಿಸುವ ಚಾಲುಕ್ಯ ಉತ್ಸವ, ಹಂಪಿ ಉತ್ಸವ, ಕಿತ್ತೂರು ಉತ್ಸವ, ಆನೆಗುಂದಿ ಉತ್ಸವ, ಬನವಾಸಿ , ಮೈಸೂರು ದಸರಾ, ಕರಾವಳಿ ಉತ್ಸವ ಗಳ ಮೂಲಕ ನಾಡಿನ ಸಾಹಿತ್ಯ, ಕಲೆ, ಸಂಗೀತ ಪರಂಪರೆಗಳನ್ನು ಸಂರಕ್ಷಿಸುವ ದಿಸೆಯಲ್ಲಿ ಮುಖ್ಯವಾಗಿದೆ. ಮುಂದಿನ ಪೀಳಿಗೆಗೆ ಕನ್ನಡದ ಶ್ರೀಮಂತ ಪರಂಪರೆ ಕೊಂಡೊಯ್ಯವ ದಿಸೆಯಲ್ಲಿ ಸರ್ಕಾರ ಎಲ್ಲ ರೀತಿಯ ನೆರವು ನೀಡಲು ಬದ್ಧವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಸಚಿವರಾದ ಸಚಿವರಾದ ಜಮೀರ್ ಅಹ್ಮದ್ ಖಾನ್,ಎಚ್.ಕೆ.ಪಾಟೀಲ್, ಬೈರತಿ ಸುರೇಶ್,‌ ಶಿವರಾಜ್ ತಂಗಡಗಿ, ಮಾಜಿ ಸಚಿವ ಬಿ. ನಾಗೇಂದ್ರ, ಸಂಸದ ತುಕಾರಾಂ, ಶಾಸಕರಾದ ಹೆಚ್. ಆರ್. ಗವಿಯಪ್ಪ, ಜೆ ಎನ್ ಗಣೇಶ್, ನಾರಾ ಭರತ್ ರೆಡ್ಡಿ, ಲತಾ ಮಲ್ಲಿಕಾರ್ಜುನ, ಡಾ. ಶ್ರೀನಿವಾಸ್, ನಾಗರಾಜ್, ನೇಮಿರಾಜ ನಾಯ್ಕ, ಕೃಷ್ಣನಾಯ್ಕ, ಹಿರಿಯ ನಾಯಕರಾದ ಎಚ್.ಎಂ‌ ರೇವಣ್ಣ, ಚಿತ್ರನಟ ಡಾ. ಶಿವರಾಜ್ ಕುಮಾರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.