ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಉದ್ಘಾಟನೆ: ನೌಕರರ ಪ್ರಾಮಾಣಿಕ ಕರ್ತವ್ಯದಿಂದ ಸರ್ಕಾರಕ್ಕೆ ಗೌರವ -ಶಾಸಕ‌ ನಾರಾ ಭರತ್ ರೆಡ್ಡಿ

ಬಳ್ಳಾರಿ,ಫೆ.17:  ಸರ್ಕಾರಿ ನೌಕರರ ಪ್ರಾಮಾಣಿಕ ಕರ್ತವ್ಯದಿಂದ ರಾಜ್ಯ ಸರ್ಕಾರಕ್ಕೆ ಗೌರವ ಸಂದಾಯವಾಗುತ್ತದೆ. ನೌಕರರು ‘ಸರ್ಕಾರಿ ಸೇವೆ-ದೇವರ ಸೇವೆ” ಎಂದು ಭಾವಿಸಿ ನಿಸ್ವಾರ್ಥ ಸೇವೆ ನೀಡುವ ಮೂಲಕ ಸಾರ್ವಜನಿಕರಿಗೆ ಪಾರದರ್ಶಕ ಆಡಳಿತ ಸೇವೆ ಒದಗಿಸಬೇಕು ಎಂದು ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಶಾಖೆ ಬಳ್ಳಾರಿ ಇವರ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಬಳ್ಳಾರಿ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಸರ್ಕಾರಿ ಭವನಕ್ಕೆ ಸರ್ಕಾರದ ಭೂಮಿ ಇಲ್ಲ ಎಂಬ ಬೇಡಿಕೆಗೆ ಸ್ಪಂದಿಸಿದ ಅವರು, ನಗರ ವ್ಯಾಪ್ತಿಯಲ್ಲಿ ಜಾಗ ಪಡೆಯಬೇಕೆಂದರೆ ಈ ಕುರಿತು ಕ್ಯಾಬಿನೆಟ್ ನಲ್ಲಿ ಚರ್ಚಿಸಬೇಕಾಗುತ್ತದೆ. ಹಾಗಾಗಿ ನಗರದಲ್ಲಿ ಸರ್ಕಾರಿ ಭೂಮಿ ಗುರುತಿಸಿ ರೂಪುರೇಷೆ ಸಿದ್ದಪಡಿಸಿ ನೀಡಿದರೆ, ಮುಂದಿನ ಕ್ರಮಕ್ಕಾಗಿ ಅಗತ್ಯ ಸಹಕಾರ ಒದಗಿಸಲಾಗುವುದು ಎಂದರು.
ರಾಷ್ಟ್ರೀಯ ಪಿಂಚಣಿ ಯೋಜನೆಯಿಂದ (ಎನ್‌ಪಿಎಸ್) ಹಳೆ ಪಿಂಚಣಿ ಯೋಜನೆಗೆ (ಒಪಿಎಸ್) ಮರಳಿ ಜಾರಿಗೊಳಸಬೇಕೆಂಬ ರಾಜ್ಯದ ಎಲ್ಲಾ ಸರ್ಕಾರಿ ನೌಕರರ ಬೇಡಿಕೆಯಾಗಿದ್ದು, ಈಗಾಗಲೇ ಮುಖ್ಯಮಂತ್ರಿಯವರು ದೇಶದಲ್ಲಿ ಜಾರಿಗೊಳಿಸಿರುವ 4 ರಾಜ್ಯಗಳಿಗೆ ಅಧ್ಯಯನ ತಂಡವು ಕಳುಹಿಸಿದ್ದು, ಅವರು ನೀಡುವ ವರದಿಯನ್ನಾಧಾರಿಸಿ ಕಾನೂನು ಚೌಕಟ್ಟಿನಲ್ಲಿ ಜಾರಿಗೊಳಿಸಲು ಮಾತುಕತೆ ನಡೆದಿದೆ ಎಂದು ತಿಳಿಸಿದ ಅವರು, ರಾಜ್ಯ ಸರ್ಕಾರವು ಮಹಿಳಾ ನೌಕರರಿಗೆ ವರ್ಷದ 12 ದಿನ ಋತುಚಕ್ರ ರಜೆ ಘೋಷಿಸಿದ್ದು, ಸರ್ಕಾರಕ್ಕೆ ಭರಪೂರ ಅಭಿನಂದನೆ ಸಲ್ಲಿದೆ ಎಂದು ಹೇಳಿದರು.


ಸರ್ಕಾರಿ ನೌಕರರು ತಮ್ಮ ಒತ್ತಡ ಜೀವನದಲ್ಲಿಯೂ ಆರೋಗ್ಯ ಸದೃಢವಾಗಿಟ್ಟುಕೊಳ್ಳಬೇಕು. ತಮ್ಮ ಕುಟುಂಬಗಳಿಗೆ ಸಮಯದ ಆದ್ಯತೆ ನೀಡಬೇಕು. ಕ್ರೀಡೆಗಳಲ್ಲಿ ಭಾಗವಹಿಸಬೇಕು. ಮುಂಬರುವ ದಿನಗಳಲ್ಲಿ ರಾಜ್ಯಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಬಳ್ಳಾರಿಯಲ್ಲಿ ಆಯೋಜಿಸಲಾಗುವುದು ಎಂದು ಹೇಳಿದರು.
ಮೇನಲ್ಲಿ ಕಸಾಪ ಸಮ್ಮೇಳನ ಆಯೋಜನೆಗೆ ಚಿಂತನೆ:
ಬಳ್ಳಾರಿಯಲ್ಲಿ ಇದೇ ಮೇ ತಿಂಗಳಿನಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮ ಆಯೋಜಿಸಲು ಚಿಂತನೆ ನಡೆಸಲಾಗಿದೆ. ಈ ಕುರಿತಂತೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸೂಚನೆ ನೀಡಿದ್ದಾರೆ. ಕನ್ನಡ ಸಾಹಿತ್ಯ ಸಮ್ಮೇಳನ ಅಚ್ಚುಕಟ್ಟಾಗಿ ಆಯೋಜನೆ ಒಳಗೊಂಡು ಕಾರ್ಯಕ್ರಮ ಯಶಸ್ವಿಗೆ ಜಿಲ್ಲೆಯ ಎಲ್ಲಾ ಸರ್ಕಾರಿ ನೌಕರರು ಕೈಜೋಡಿಸಬೇಕು ಎಂದರು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಬಳ್ಳಾರಿ ಜಿಲ್ಲಾ ಶಾಖೆ ಜಿಲ್ಲಾಧ್ಯಕ್ಷ (ಪ್ರಭಾರಿ) ಡಾ.ಸದಾನಂದ ನೆಲ್ಕುದ್ರಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ದೈಹಿಕ- ಮಾನಸಿಕ ಬಲವರ್ಧನೆಗೆ ದೇಹ ಸಂಯಮಿಸುತ್ತದೆ. ಇದರ ಜೊತೆಗೆ ಶಿಸ್ತು- ಸಂಯಮ ಕಲಿಯಲು ಸಹಕಾರಿಯಾಗಲಿದೆ ಎಂದು ಹೇಳಿದರು.
ಸರ್ಕಾರದ ಪ್ರತಿಯೊಂದು ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸಲು ನೌಕರರು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತಿದ್ದು, ಅವರ ದಿನನಿತ್ಯದ ಒತ್ತಡದ ಬದುಕಿನಲ್ಲಿ ವಿರಮಿತರಾಗಲು ಎರಡು ದಿನಗಳ ಕಾಲ ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಕ್ರೀಡಾ ಮನೋಭಾವನೆಯಿಂದ ಎಲ್ಲರೂ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದರು.

ಸನ್ಮಾನ: ಇದೇ ಸಂದರ್ಭದಲ್ಲಿ ರಾಷ್ಟ್ರಮಟ್ಟದಲ್ಲಿ ಸಾಧನೆಗೈದ ಡಾ. ಶಿವಲಿಂಗಪ್ಪ ಹಂದ್ಯಾಳ್, ಶಾಂತಮ್ಮ ಛಲವಾದಿ, ಶೇಕ್ಷಾವಲಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಪಿ. ರವಿಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಎನ್. ಬಸರೆಡ್ಡಿ, ರಾಜ್ಯ ಸರ್ಕಾರಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷ ಡಾ. ಎಂ.ಟಿ. ಮಲ್ಲೇಶ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಕೆ.ಗ್ರೇಸಿ, ಅಬಕಾರಿ ಇಲಾಖೆಯ ಅಧೀಕ್ಷಕ ಅನೀಲ್ ಕುಮಾರ್ ಸೇರಿದಂತೆ ಮಹಾನಗರ ಪಾಲಿಕೆ ಸದಸ್ಯರು, ಜಿಲ್ಲಾ ಶಾಖೆಯ ಪದಾಧಿಕಾರಿಗಳು, ತಾಲ್ಲೂಕು ಅಧ್ಯಕ್ಷರು ಹಾಗೂ ಸರ್ಕಾರಿ ನೌಕರರು ಭಾಗವಹಿಸಿದ್ದರು.
ಇದಕ್ಕೂ ಮುನ್ನ ಕಂಪ್ಲಿ, ಕುರುಗೋಡು, ಸಂಡೂರು, ಸಿರುಗುಪ್ಪ ಮತ್ತು ಬಳ್ಳಾರಿ ತಾಲ್ಲೂಕುಗಳಿಂದ ಭಾಗವಹಿಸಲು ಆಗಮಿಸಿದ್ದ ಸರ್ಕಾರಿ ನೌಕರರಿಂದ ಆಕರ್ಷಕ ಪಥಸಂಚಲನ ನಡೆಯಿತು. ಬಳಿಕ ಕ್ರೀಡಾಜ್ಯೋತಿ ಸ್ವೀಕರಿಸಿ, ಕ್ರೀಡಾ ಧ್ವಜಾರೋಹಣ ನೆರವೇರಿಸಲಾಯಿತು.
ಬಳಿಕ ಜಿಲ್ಲಾ ಕ್ರೀಡಾಂಗಣದಲ್ಲಿ ಹೊರಾಂಗಣ, ಒಳಾಂಗಣದಲ್ಲಿ ವಿವಿಧ ವಿಭಾಗದ ಕ್ರೀಡೆಗಳು ನಡೆದರೆ, ಮಹರ್ಷಿ ವಾಲ್ಮೀಕಿ ಭವನದಲ್ಲಿ ಸಾಂಸ್ಕೃತಿಕ ಸ್ಪರ್ಧೆ ಕಾರ್ಯಕ್ರಮಗಳು ನಡೆದವು.
—–