ಬಳ್ಳಾರಿಯ ಕೊಳಗಲ್ ಗ್ರಾಮದಲ್ಲಿ ಕಾರ ಹುಣ್ಣಿಮೆ ಆಚರಣೆಗೆ ನಿಷೇಧ: ಜಿಲ್ಲಾಧಿಕಾರಿ ಆದೇಶ

ಬಳ್ಳಾರಿ,ಜೂ.24: ತಾಲೂಕಿನ ಕೊಳಗಲ್ ಗ್ರಾಮದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಶಾಂತಿ ಕಾಪಾಡುವ ಹಿತದೃಷ್ಟಿಯಿಂದ ಜೂ. 29 ಮತ್ತು 30 ರಂದು ನಡೆಯಬೇಕಿದ್ದ ‘ಕಾರ ಹುಣ್ಣಿಮೆ’ ಹಬ್ಬದ ಆಚರಣೆಯನ್ನು ನಿಷೇಧಿಸಿ ಬಳ್ಳಾರಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ನಾಗೇಂದ್ರ ಪ್ರಸಾದ್ ಕೆ. ಅವರು ಆದೇಶ ಹೊರಡಿಸಿದ್ದಾರೆ.

ಜಿಲ್ಲಾ ಪೊಲೀಸ್ ಅಧೀಕ್ಷಕರು ಸಲ್ಲಿಸಿದ್ದ ವರದಿಯ ಪ್ರಕಾರ, ಕೊಳಗಲ್ಲು ಗ್ರಾಮದಲ್ಲಿ ಇತ್ತೀಚಿನ ದಿನಗಳಲ್ಲಿ ಗಲಭೆಗಳು ಹೆಚ್ಚಾಗುತ್ತಿವೆ. ಗ್ರಾಮಸ್ಥರಲ್ಲಿ ಜಾತಿ-ಜಾತಿಗಳ ಮಧ್ಯೆ ವೈಷಮ್ಯತೆ ಹೆಚ್ಚಾಗುತ್ತಿದ್ದು, ಪೊಲೀಸ್ ಠಾಣೆಯಲ್ಲಿ ಪರ-ವಿರೋಧ ಪ್ರಕರಣಗಳು ದಾಖಲಾಗುತ್ತಿವೆ. ಇಂತಹ ಸೂಕ್ಷ್ಮ ಪರಿಸ್ಥಿತಿಯಲ್ಲಿ ಕಾರ ಹುಣ್ಣಿಮೆ ಹಬ್ಬವನ್ನು ಆಚರಿಸಲು ಅವಕಾಶ ನೀಡಿದರೆ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗುವ ಸಾಧ್ಯತೆ ಇದೆ. ಸಾರ್ವಜನಿಕರ ಆಸ್ತಿಪಾಸ್ತಿ ಹಾನಿ ಹಾಗೂ ಜನರ ಮಾನ-ಪ್ರಾಣಕ್ಕೆ ತೊಂದರೆಯಾಗುವ ಸಂಭವ ಹೆಚ್ಚಿರುವುದರಿಂದ ಈ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.
ಕರ್ನಾಟಕ ಪೊಲೀಸ್ ಕಾಯ್ದೆ 1963 ರ ಕಲಂ 35 ರ ಅಡಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಜೂನ್ 29 ಮತ್ತು ಜೂನ್ 30 ರಂದು ಹಬ್ಬದ ಆಚರಣೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.
—–

Leave a Reply

Your email address will not be published. Required fields are marked *