ವಾರ್ತಾ ಇಲಾಖೆ ನೂತನ ಆಯುಕ್ತ ಡಿಐಜಿ ಎಂ.ಎನ್.ಅನುಚೇತ್

ಎಂ.ಎನ್.ಅನುಚೇತ್ ಐಪಿಎಸ್

ಬೆಂಗಳೂರು, ಜೂ. 24: ರಾಜ್ಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನೂತನ ಆಯುಕ್ತರನ್ನಾಗಿ ಐಪಿಎಸ್ ಅಧಿಕಾರಿ ಡಿಐಜಿ ಎಂ.ಎನ್.ಅನುಚೇತ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ.

ಅವರು ಗುರುವಾರ ಅಧಿಕಾರ ಸ್ವೀಕಾರ ಮಾಡಲಿದ್ದಾರೆ.
ವಾರ್ತಾ ಇಲಾಖೆಯ ಜೊತೆಗೆ ಯುವ ಜನ ಸೇವೆ ಹಾಗೂ ಕ್ರೀಡಾ ಇಲಾಖೆಯ ಆಯುಕ್ತರ ಹೆಚ್ಚುವರಿ ಪ್ರಬಾರದಲ್ಲೂ ಇವರನ್ನು ಇರಿಸಿ ಸರ್ಕಾರ ಆದೇಶಿಸಿದೆ.
ಎಂ.ಎನ್. ಅನುಚೇತ್ ಅವರು ಮೂಲತಃ ಕೋಲಾರ ಜಿಲ್ಲೆಯವರಾಗಿದ್ದಾರೆ. ಬೆಂಗಳೂರಿನ ಆರ್.ವಿ. ಇಂಜಿನಿಯರಿಂಗ್ ಕಾಲೇಜಿನಿಂದ 2006ರಲ್ಲಿ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಪದವಿ ಮುಗಿಸಿರುವ ಇವರು ತಾಂತ್ರಿಕ ಹಿನ್ನೆಲೆಯನ್ನು ಹೊಂದಿದ್ದಾರೆ. ಆ ಬಳಿಕ ನಾಗರಿಕ ಸೇವೆಗೆ ಸೇರುವ ಆಕಾಂಕ್ಷೆಯೊಂದಿಗೆ ಶ್ರಮಿಸಿ, 2008ರ ಸಿವಿಲ್ ಸರ್ವಿಸ್ ಪರೀಕ್ಷೆಯಲ್ಲಿ ಅತ್ಯುತ್ತಮ ಯಶಸ್ಸು ಸಾಧಿಸಿದರು. ತರುವಾಯ 2009ರ ಬ್ಯಾಚ್ನ ಕರ್ನಾಟಕ ವೃಂದದ ಐಪಿಎಸ್ ಅಧಿಕಾರಿಯಾಗಿ ಇವರು ಆಯ್ಕೆಯಾದರು.
ವಾರ್ತಾ ಇಲಾಖೆಯ ಕಾರ್ಯವೈಖರಿಗೆ ಹೊಸ ವೇಗ ನೀಡಬಲ್ಲ ಸಾಮರ್ಥ್ಯ ಹೊಂದಿರುವ ಅನುಚೇತ್ ಅವರು, ಪೊಲೀಸ್ ಇಲಾಖೆಯಲ್ಲಿ ತಂತ್ರಜ್ಞಾನ ಆಧಾರಿತ ಪೊಲೀಸ್ ವ್ಯವಸ್ಥೆ ಹಾಗೂ ಸಮರ್ಥ ಆಡಳಿತಕ್ಕಾಗಿ ಹೆಸರಾಗಿದ್ದಾರೆ. ಈ ಹಿಂದೆ ಇವರು ಕೈಗೊಂಡ ಅತ್ಯುತ್ತಮ ತನಿಖಾ ಕಾರ್ಯಗಳನ್ನು ಗುರುತಿಸಿ ಕೇಂದ್ರ ಸರ್ಕಾರವು ಇವರಿಗೆ ಪ್ರತಿಷ್ಠಿತ “ಕೇಂದ್ರ ಗೃಹ ಸಚಿವರ ತನಿಖೆಗಾಗಿನ ಅತ್ಯುತ್ತಮ ಪದಕ ನೀಡಿ ಗೌರವಿಸಿದೆ.
2011ರಲ್ಲಿ ಪುತ್ತೂರಿನ ಸಹಾಯಕ ಪೊಲೀಸ್ ಅಧೀಕ್ಷಕರಾಗಿ ತಮ್ಮ ವೃತ್ತಿಜೀವನ ಆರಂಭಿಸಿದ ಇವರು, ಆ ಬಳಿಕ ಸಿಐಡಿ  ವಿಭಾಗದ ಎಸ್ಪಿ ಆಗಿ, ಬೆಂಗಳೂರು ನಗರದ ಕೇಂದ್ರ ವಿಭಾಗದ ಡಿಸಿಪಿಗಳಾಗಿ ಪ್ರಮುಖ ಜವಾಬ್ದಾರಿಗಳನ್ನು ನಿಭಾಯಿಸಿದ್ದಾರೆ. ಇತ್ತೀಚೆಗೆ ಬೆಂಗಳೂರು ನಗರದ ಜಂಟಿ ಪೊಲೀಸ್ ಕಮಿಷನರ್ (ಸಂಚಾರ) ಆಗಿ ಅತ್ಯಂತ ಯಶಸ್ವಿಯಾಗಿ ಸೇವೆ ಸಲ್ಲಿಸಿ, ನಗರದ ಸಂಚಾರ ನಿಯಂತ್ರಣಕ್ಕೆ ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನವನ್ನು ಅಳವಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಈ ಹುದ್ದೆಗೆ ಬರುವ ಮುನ್ನ ಇವರು ಪೊಲೀಸ್ ನೇಮಕಾತಿ ವಿಭಾಗದ ಡಿಐಜಿಪಿಗಳಾಗಿ ಕಾರ್ಯನಿರ್ವಹಿಸುತ್ತಿದ್ದರು.

ಅಭಿನಂದನೆ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ಅಧಿಕಾರ ಸ್ವೀಕರಿಸಲಿರುವ ಡಿಐಜಿ ಎಂ.ಎನ್. ಅನುಚ್ಚೇತ್ ಅವರನ್ನು ಕರ್ನಾಟಕಕಹಳೆ ಡಾಟ್ ಕಾಮ್ ಸಂಪಾದಕರೂ ಆಗಿರುವ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಿ.ಮಂಜುನಾಥ ಅವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *